ಹಾರಂಗಿ ಜಲಾಶಯಕ್ಕೆ ವಿ.ಸೋಮಣ್ಣ ಬಾಗಿನ ಅರ್ಪಣೆ

ಮಡಿಕೇರಿ : ಹಾರಂಗಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಹಾರಂಗಿ ಜಲಾಶಯಕ್ಕೆ ಶುಕ್ರವಾರ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಿಸುವುದಕ್ಕೆ ಮೊದಲು ತಾಯಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಹಾರಂಗಿ ಜಲಾಶಯದ ಕ್ರೆಸ್ಟ್ ಗೇಟ್‌ಗಳಿಂದ ನದಿಗೆ ನೀರು ಬಿಡುವುದಕ್ಕೆ ಚಾಲನೆ ನೀಡಿ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಹಾರಂಗಿ ಜಲಾಶಯ ಪ್ರಮುಖವಾಗಿದ್ದು, ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿರುವುದು ವಿಶೇಷವಾಗಿದೆ ಎಂದರು.
ಪ್ರಸಕ್ತ ವರ್ಷದಲ್ಲಿ ಖಾರಿಪ್ ಬೆಳೆಗೆ ಹಾಗೂ ಕೆರೆ ಕಟ್ಟೆಗಳಿಗೆ ನೀರು ಹರಿಸುವುದಕ್ಕೆ ಚಾಲನೆ ನೀಡಲಾಗಿದೆ. ೧.೬೦ ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆಯಾಗಲಿದೆ. ಜಿಲ್ಲೆಯ ಸೋಮವಾರಪೇಟೆ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು, ಕೃಷ್ಣರಾಜನಗರ ಹಾಗೂ ಹಾಸನ ಜಿಲ್ಲೆಯ ಅರಕಲಗೋಡು ತಾಲ್ಲೂಕು ವ್ಯಾಪ್ತಿಗೆ ನೀರು ಸೌಲಭ್ಯ ದೊರೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಅತಿವೃಷ್ಟಿಯಿಂದ ಕೆಲವು ಕಡೆ ಹಾನಿಯಾಗಿದ್ದರೂ ಸಹ ರಾಜ್ಯದ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ ಎಂದು ಸಚಿವರು ಹೇಳಿದರು.
ಶಾಸಕರಾದ ಎಂ.ಪಿ.ಅಪ್ಪಚ್ಟುರಂಜನ್, ಎ.ಟಿ.ರಾಮಸ್ವಾಮಿ, ಮಹದೇವು, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಕಾಡಾ ಅಧ್ಯಕ್ಷರಾದ ಶಿವಲಿಂಗಯ್ಯ, ನೀರಾವರಿ ದಕ್ಷಿಣ ವಲಯದ ಮುಖ್ಯ ಎಂಜಿನಿಯರ್ ಶಂಕರೇಗೌಡ, ಅಧೀಕ್ಷಕ ಎಂಜಿನಿಯರ್ ಚೆನ್ನಕೇಶವ, ಕಾರ್ಯಪಾಲಕ ಎಂಜಿನಿಯರ್ ಮಂಜು, ಎಇಇ ಮಹೇಂದ್ರ ಕುಮಾರ್, ಸಹಾಯಕ ಎಂಜಿನಿಯರ್ ಸಿದ್ದರಾಜು, ಹಾರಂಗಿ ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಚೌಡೇಗೌಡ, ತಹಶೀಲ್ದಾರ್ ಗೋವಿಂದ ರಾಜು, ಪ್ರಕಾಶ್, ಇತರರು ಇದ್ದರು.

Leave a Reply

Your email address will not be published. Required fields are marked *