ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಂಗೀಕಾರವಾಗಿದೆ.
ಆ ಮೂಲಕ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ರಾಜೀನಾಮೆ ವಿಚಾರಕ್ಕೆ ತೆರೆಬಿದ್ದಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಸರ್ಕಾರದ ಸಾಧನಾ ಸಮಾವೇಶದಲ್ಲಿಯೇ ಈ ಬಗ್ಗೆ ಘೋಷಣೆ ಮಾಡಿದ್ದರು.
ಕಾರ್ಯಕ್ರಮದ ಬಳಿಕ ಉಟೋಪಚಾರ ಮುಗಿಸಿ ಆ ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಇನ್ನು ಮುಂದೆ ನೂತನ ಮುಖ್ಯಮಂತ್ರಿ ನೇಮಕದವರೆಗೂ ಅವರು ಹಂಗಾಮಿಯಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ.
ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಒಂದು ಬಾರಿಯೂ ಪೂರ್ಣಾವಧಿ ಪೂರೈಸದಿರುವುದು ಮಾತ್ರ ದುರ್ದೈವವೇ ಸರಿ. ಇನ್ನು 2011ರಲ್ಲಿಯೂ ಜುಲೈ ತಿಂಗಳಲ್ಲಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.