ಕಣ್ಣೀರಿಟ್ಟು ಬಿಎಸ್‍ವೈ ನಿರ್ಗಮನ

ಮುಂದಿನ ಮುಖ್ಯಮಂತ್ರಿ ಹೈಕಮಾಂಡ್ ನಿರ್ಧಾರ ಪಕ್ಷ ಸಂಘಟನೆಗೆ ಶಪಥ

ಬೆಂಗಳೂರು, ಜು. 26- ನಿರೀಕ್ಷಿಯಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮಧ್ಯಾಹ್ನ 12.30ರ ವೇಳೆಗೆ ರಾಜ್ಯಭವನಕ್ಕೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಮುಖ್ಯಮಂತ್ರಿಗಳ ರಾಜೀನಾಮೆಯನ್ನು ಸ್ವೀಕರಿಸಿದ ರಾಜ್ಯಪಾಲರು, ನೂತನ ಮುಖ್ಯಮಂತ್ರಿ ಆಯ್ಕೆಯಾಗುವವರೆಗೂ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯುಂತೆ ಸೂಚನೆ ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಭವನಕ್ಕೆ ತೆರಳುವ ಮೊದಲು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ತಮ್ಮ ನೇತೃತ್ವದ ಬಿಜೆಪಿ ಸರ್ಕಾರ 2 ವರ್ಷದ ಸಾಧನಾ ಸಮಾವೇಶದಲ್ಲಿ ಕಣ್ಣೀರುಡುತ್ತಲೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಈ ಕಾರ್ಯಕ್ರಮ ಮುಗಿದ ನಂತರ ಸಚಿವರುಗಳೊಂದಿಗೆ ಊಟ ಮಾಡಿ ರಾಜ್ಯಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಗದ್ಗದಿತರಾಗಿಯೇ ಹೇಳಿದರು. 

ಸರ್ಕಾರದ ಸಾಧನಾ ಸಮಾವೇಶದಲ್ಲಿ ಗದ್ಗದಿತರಾಗಿಯೇ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ ಯಡಿಯೂರಪ್ಪ ಅವರು, ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ. ಸಂತೋಷದಿಂದಲೇ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಣ್ಣೀರಿಡುತ್ತಲೆ ಹೇಳಿದರು.

ಕಾರ್ಯಕ್ರಮ ಮುಗಿದ ನಂತರ ಸಚಿವರ ಜತೆ ಊಟ ಮಾಡಿ ನಂತರ ರಾಜ್ಯಭವನಕ್ಕೆ ತೆರಳಿ, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜ್ಯಭವನದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಅವರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದರು.

ಇದಾದ ನಂತರ ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿದರು.

ಒತ್ತಡ ಇಲ್ಲ

ಪಕ್ಷದ ವರಿಷ್ಠರ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡುತ್ತಿಲ್ಲ. ಸ್ವಯಂ ಪ್ರೇರಿತನಾಗಿ ರಾಜೀನಾಮೆ ನೀಡಿದ್ದೇನೆ. ದೆಹಲಿಯಿಂದ ರಾಜೀನಾಮೆ ನೀಡುವಂತೆ ತಮಗೆ ಯಾವುದೇ ಒತ್ತಡ ಇರಲಿಲ್ಲ ಎಂದು ರಾಜೀನಾಮೆ ನೀಡಿದ ನಂತರ ರಾಜ್ಯಭವನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. 

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ತಮ್ಮ ಸ್ವತಃ ನಿರ್ಧಾರ. 2 ದಿನಗಳ ಹಿಂದೆಯೇ ನಾನು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದೇ ಎಂದರು. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನಂತೂ ಇಂತಹವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಂದೆ ಯಾರೇ ಮುಖ್ಯಮಂತ್ರಿಯಾದರೂ ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ

ರಾಜ್ಯದಲ್ಲಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ 2 ವರ್ಷ ಆಡಳಿತ ನಡೆಸಲು ಅವಕಾಶ ನೀಡಿದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಧನ್ಯವಾದ ಹೇಳಿದ ಅವರು, ಬಿಜೆಪಿಯಲ್ಲಿ 75 ವರ್ಷ ಮೀರಿದವರಿಗೆ ಯಾರಿಗೂ ಅಧಿಕಾರ ನೀಡಿಲ್ಲ ಆದರೆ ನನಗೆ ಅಧಿಕಾರ ನೀಡಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಅವರಿಗೆ ಕೃತಜ್ಞತೆಗಳು ಎಂದರು.

ನಾಡಿನ ಎಲ್ಲ ಸ್ವಾಮೀಜಿಗಳು ತಮಗೆ ಬೆಂಬಲ ನೀಡಿದ್ದಾರೆ. ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೂ ಸ್ವಾಮೀಜಿಗಳು ನೂತನ ಮುಖ್ಯಮಂತ್ರಿಗೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯಡಿಯೂರಪ್ಪ ಅವರು, ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಇಲ್ಲ ಎಂದು ಘೋಷಿಸಿದ್ದಾರೆ. 

ಯಾವುದೇ ರಾಜ್ಯದ ರಾಜ್ಯಪಾಲ ಹುದ್ದೆಯನ್ನು ಅಲಂಕರಿಸುವುದಿಲ್ಲ. ರಾಜ್ಯ ರಾಜಕೀಯದಲ್ಲೇ ಇರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯಭವನದ ಹೊರಗಡೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲೇ ಇದ್ದು, ಪಕ್ಷ ಸಂಘಟನೆಗೆ ಕೆಲಸ ಮಾಡುತ್ತೇನೆ. ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ ಎಂದರು

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಓಡಾಡಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಹೊರತು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.

Leave a Reply

Your email address will not be published. Required fields are marked *