ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಆದ ಬೆನ್ನಲ್ಲಿ ಕರ್ನಾಟಕ ಸರ್ಕಾರಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ಆಗಿದ್ದು ಆಯ್ತು. ರಾಜ್ಯ ಸಚಿವ ಸಂಪುಟ ರಚನೆಯಾಗಿದ್ದುಒಂದು ವಾರವೂ ಕಳೆದು ಹೋಯಿತು.
ಆದ್ರೆ ಬಿಜೆಪಿ ಪಕ್ಷದಲ್ಲಿ ಮಾತ್ರ ಅತೃಪ್ತರ ಸಂಖ್ಯೆ ಕಡಿಮೆಯಾಗುವ ಬದಲು ಜಾಸ್ತಿಯಾಗುತ್ತಿದೆ. ಹೌದು ಸಚಿವ ಸಂಪುಟದಲ್ಲಿ ಸ್ಥಾನ ಸಿಗದವರು ದೆಹಲಿಯತ್ತ ಮುಖ ಮಾಡುತ್ತಿದ್ದರೆ, ಸಚಿವ ಸ್ಥಾನ ಗಿಟ್ಟಿಸಿಕೊಂಡವರಲ್ಲಿ ಕೆಲವರಿಗೆ ಖಾತೆ ಬಗ್ಗೆ ಅತೃಪ್ತಿ ಕಾಡುತ್ತಿದೆ. ಹೀಗಾಗಿ ತಮ್ಮ ತಮ್ಮ ನೆಚ್ಚಿನ ಖಾತೆ ಗಿಟ್ಟಿಸಿಕೊಳ್ಳೋಕೆ ಸಾಕಷ್ಟು ಹಂತದಲ್ಲಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಕೆಲವರು ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನ ಹಾಗೂ ಆಕ್ಷೇಪಗಳನ್ನು ವ್ಯಕ್ತಪಡಿಸುತ್ತಿದ್ದರೆ ಮತ್ತೆ ಕೆಲವರು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯತ್ತ ಮುಖ ಮಾಡುತ್ತಿದ್ದಾರೆ.
ಅಲ್ಲದೆ ಇನ್ನು ಕೆಲವರು ರಾಷ್ಟ್ರಮಟ್ಟದ ನಾಯಕರನ್ನು, ಸಂಘ ಪರಿವಾರದವರನ್ನು ಮತ್ತು ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.

ಇನ್ನು ಶಾಸಕರ ಹಾಗೂ ಸಚಿವರು ಬಹಿರಂಗವಾಗಿಯೇ ಅಸಮಾಧಾನವನ್ನು ಹೊರಹಾಕುತ್ತಿದ್ದು, ಇದನ್ನು ಕಂಡ ಮುಖ್ಯಮಂತ್ರಿ ಬೊಮ್ಮಾಯಿ ಅವರು
ಮಾಜಿ ಸಿಎಂ ಬಿಎಸ್ವೈ ಅವರ ಮೊರೆ ಹೋಗುತ್ತಿದ್ದು, ಪಕ್ಷದ ನಾಯಕರಲ್ಲಿನ ಅಶಿಸ್ತನ್ನು ಶಮನಗೊಳಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಇತ್ತ ಶಾಸಕ ಅಪ್ಪಚ್ಚುರಂಜನ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುಂಟಿಕೊಪ್ಪ, ಸೋಮವಾರಪೇಟೆ, ಕುಶಾಲನಗರ ಹಾಗೂ ಕೊಡಗು ಸೇರಿದಂತೆ ವಿವಿಧ ಭಾಗಗಳಿಂದ ಸುಮಾರು 150 ವಾಹನಗಳಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ನಿನ್ನೆ ಬೆಂಗಳೂರಿಗೆ ಬಂದಿದ್ದು, ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ಮುಂದಾಗಿದ್ದ ಶಾಸಕ ಅಪ್ಪಚ್ಚುರಂಜನ್ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಬೆಂಬಲಿಗರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಬಳಿಕ ಕೆಲವರಿಗೆ ಮಾತ್ರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಲು ಅವಕಾಶ ನೀಡಿ ಪ್ರತಿಭಟನಾಕಾರರನ್ನು ಸಮಾಧಾನ ಪಡಿಸಲಾಯಿತು.
ಇನ್ನು ಮುಖ್ಯಮಂತ್ರಿಗಳ ನಿವಾಸದಲ್ಲಿ ನೆನ್ನೆ ಸಭೆ ನಡೆದಿದ್ದು, ಮುಂದಿನ ಸಂಪುಟ ವಿಸ್ತರಣೆ ಸಮಯದಲ್ಲಿ ಮತ್ತು ಪಕ್ಷದ ಉನ್ನತ ಅಧಿಕಾರಿಗಳು ಅನುಮೋದನೆ ಬಳಿಕ ಬೇಡಿಕೆಯನ್ನು ಪೂರೈಸುವುದಾಗಿ ನಿಯೋಗಕ್ಕೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಇದಾದ ಬಳಿಕ ನಿಯೋಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಬಿಎಸ್ ವೈ ಅವರನ್ನು ಭೇಟಿ ಮಾಡಿ ಅಪ್ಪಚ್ಚುರಂಜನ್ ಅವರನ್ನು ಸಂಪುಟಕ್ಕೆ ಸೇರಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.