ಮೈಸೂರು: ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗಿ ಸುಭೀಕ್ಷೆಯಿಂದ ಕೂಡಿರಲಿ, ಜನರಲ್ಲಿ ಸುಖ ಸಂತೋಷ ವೃದ್ಧಿಯಾಗಲಿ, ರಾಜ್ಯವನ್ನು ಆವರಿಸಿರುವ ಕೊರೊನಾ ದೂರವಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಾರ್ಥಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಅರಮನೆನಗರಿಗೆ ಭೇಟಿ ನೀಡಿದ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯವರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಇಡೀ ಚಾಮುಂಡಿಬೆಟ್ಟ ಮುಂಜಾನೆಯಿಂದಲೇ ಮೈಕೊಡವಿಕೊಂಡು ಎದ್ದು ಕಾಯುತ್ತಿತ್ತು. ಮುಖ್ಯಮಂತ್ರಿಗಳು ಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಈ ಬಾರಿ ಜಿಲ್ಲೆಗೆ ಮುಖ್ಯಮಂತ್ರಿಗಳು ರಸ್ತೆ ಮೂಲಕವೇ ಆಗಮಿಸಿದ್ದು ವಿಶೇಷವಾಗಿತ್ತು.

ಸಾಮಾನ್ಯವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಲ್ಲ ಮುಖ್ಯಮಂತ್ರಿಗಳು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸುವುದು ಸಾಮಾನ್ಯವಾಗಿದೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲ್ ಗಳು ಬಹಳಷ್ಟಿದ್ದು, ಸಂಪುಟ ರಚನೆ ಮತ್ತು ಖಾತೆ ಹಂಚಿಕೆ ನಂತರ ನಡೆದಿರುವ ಬೆಳವಣಿಗೆಗಳನ್ನು ಗಮನಿಸಿದರೆ ಸ್ವಪಕ್ಷದೊಳಗೆ ಇರುವ ಭಿನ್ನಾಭಿಪ್ರಾಯಗಳನ್ನು ಶಮನಗೊಳಿಸಿ ಆಡಳಿತ ನಡೆಸುವುದು ಅಷ್ಟು ಸುಲಭವಾಗಿ ಉಳಿದಿಲ್ಲ. ಹೀಗಾಗಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿರುವ ಅವರು ಎಲ್ಲವೂ ಸುಲಲಿತವಾಗಿ ನಡೆಯಲು ಪ್ರಾರ್ಥಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ತಾಯಿ ಚಾಮುಂಡೇಶ್ವರಿಯೇ ಅಸಮಾಧಾನ ಗೊಂಡಿರುವ ಶಾಸಕರಿಗೆ ಸಮಾಧಾನವಾಗುವಂತೆ ದಯಪಾಲಿಸಬೇಕಿದೆ.
ಸಚಿವರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಡಾ.ಕೆ.ಸುಧಾಕರ್, ಡಾ.ನಾರಾಯಣಗೌಡ, ಮುನಿರತ್ನ, ಗೋಪಾಲಯ್ಯ. ಅವರು ಜತೆಗೆ ಇದ್ದರು.